“ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿಮಾಡಲು ಮತ್ತು ಹೊಸ ಹುದ್ದೆ ಸೃಷ್ಟಿಸಲು ಎಐಡಿವೈಓ ಆಗ್ರಹ”
ಕೊಪ್ಪಳ : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಇತ್ತೀಚಿಗೆ ಮಾಧ್ಯಮದಲ್ಲಿ ವರದಿಯಾಗಿರುವ ಖಾಲಿಹುದ್ದೆಗಳ ಪ್ರಮಾಣವು ತಿಳಿದು ಆಘಾತಕಾರಿಯಾಗಿದೆ. ಸರ್ಕಾರಲ್ಲಿ ಒಟ್ಟು ಮಂಜೂರಾಗಿರುವ 7,76,414 ಹುದ್ದೆಗಳಲ್ಲಿಅದರಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಅಂದರೆ ಬರೋಬ್ಬರಿ ಶೇಕಡಾ 37 ರಷ್ಟು ಹುದ್ದೆಗಳು ಖಾಲಿ ಇವೆ. ಹೀಗಿದ್ದಾಗ ಜನರಿಗೆ ಸರ್ಕಾರಿ ಸೇವೆಗಳು ತಲುಪುವುದಾದರೂ ಹೇಗೆ? ಇರುವ ನೌಕರರ ಮೇಲೆ ಕೆಲಸದ ಹೆಚ್ಚಿನ ಹೊರೆ ಬೀಳುತ್ತದೆ. ರಾಜ್ಯದ ಪ್ರಗತಿಗೆ ಕುಂಠಿತವಾಗಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್(ಎ ಐ ಡಿ ವೈ ಓ) ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವಂಕಲಕುಂಟಾ ಮತ್ತು ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಅವರು ತಿಳಿಸಿದ್ದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೂಕ್ತ ಅರ್ಹತೆ ಹೊಂದಿರುವ ಲಕ್ಷಾಂತರ ಮಂದಿ ಯುವಜನರು ಉದ್ಯೋಗಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ರಾಜ್ಯ ಸರ್ಕಾರವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಖಾಲಿ ಹುದ್ದೆಗಳ ಭರ್ತಿಯ ಭರವಸೆಯನ್ನು ಸಂಪೂರ್ಣವಾಗಿ ಮರೆತಿದೆ. ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನರು ಹತಾಶೆಗೊಂಡಿದ್ದಾರೆ. ಭವಿಷ್ಯದ ಬಗ್ಗೆ ಭರವಸೆ ಕಳೆದುಕೊಂಡು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಲವೇ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದರೂ ಸಹ ಅವು ಆಮೆಗತಿಯಲ್ಲಿ ಸಾಗುತ್ತಿವೆ. ಕೆಪಿಎಸ್ಸಿ ಮೂಲಕ ಕಳೆದ 5 ವರ್ಷಗಳಲ್ಲಿ ಪ್ರಾರಂಭಗೊಂಡು ನೆನಗುದಿಗೆ ಬಿದ್ದಿರುವ 67 ನೇಮಕಾತಿ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸರ್ಕಾರ ಕೇವಲ ಜನಪರ ಯೋಜನೆಗಳನ್ನು ಜಾರಿಗೆ ತಂದರಷ್ಟೇ ಸಾಲದು ಅವುಗಳನ್ನು ಕೊನೆಯ ವ್ಯಕ್ತಿಯವರೆಗೂ ತಲುಪಿಸಲು ಅಗತ್ಯವಾದ ಸಿಬ್ಬಂದಿ ವರ್ಗವನ್ನು ನೇಮಕ ಮಾಡಿಕೊಳ್ಳಬೇಕು. ಆದ್ದರಿಂದ ರಾಜ್ಯ ಸರ್ಕಾರವು ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಈ ಕೂಡಲೇ ಖಾಯಂ ಆಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಉದ್ಯೋಗಕ್ಕಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಹೊಸ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಕೊಪ್ಪಳ ಜಿಲ್ಲಾ ಸಮಿತಿಯು ಪತ್ರಿಕಾ ಪ್ರಕಟಣೆ ಮೂಲಕ ಸರಕಾರಕ್ಕೆ ಒತ್ತಾಯಿಸುತ್ತದೆ ಎಂದರು.