LOCAL NEWS : ಕಡಲೆ ಬೆಳೆ ಬೆಂಬಲ ಬೆಲೆ ಹಾಗೂ ಬರ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘ–ಹಸಿರು ಸೇನೆಯ ಬೃಹತ್ ಪ್ರತಿಭಟನೆ!
ಪ್ರಜಾ ವೀಕ್ಷಣೆ ಸುದ್ದಿ:
ಕುಕನೂರು : ಕಡಲೆ ಬೆಳೆಗೆ ತಕ್ಷಣವೇ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಬರದಿಂದ ನಷ್ಟ ಅನುಭವಿಸಿದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಿ.ಆರ್. ನಾರಾಯಣರೆಡ್ಡಿ ಬಣ) ಕುಕನೂರು ತಾಲೂಕಾ ಮತ್ತು ನಗರ ಘಟಕದ ವತಿಯಿಂದ ಇಂದು (ಮಂಗಳವಾರ, ಡಿಸೆಂಬರ್ 24) ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಶಿರೂರು ವೀರಭದ್ರಪ್ಪ ವೃತ್ತದವರೆಗೆ ರೈತರು ಮೆರವಣಿಗೆ ನಡೆಸಿ, ಬಳಿಕ ತಹಶೀಲ್ದಾರ್ ಎಚ್. ಪ್ರಾಣೇಶ್ ಹಾಗೂ ಎಪಿಎಂಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಹುರಳಿ ಮಾತನಾಡಿ, ‘ಹೆಸರು ಬೇಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಹಿಂದೆಯೇ ಮನವಿ ಮಾಡಿದರೂ ಸರಿಯಾದ ಸಮಯಕ್ಕೆ ಖರೀದಿ ಕೇಂದ್ರ ತೆರೆಯದೆ ರೈತರಿಗೆ ಭಾರಿ ನಷ್ಟ ಉಂಟಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಕನೂರು ತಾಲ್ಲೂಕಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆಯಾಗದೆ ಬೆಳೆ ಹಾನಿಯಾಗಿದ್ದು, ಇದುವರೆಗೂ ಸರ್ಕಾರದಿಂದ ಬರ ಪರಿಹಾರ ನೀಡಿಲ್ಲ ಎಂದು ದೂರಿದರು. ಅಲ್ಲದೆ, ಪಟ್ಟಣದ ಎಪಿಎಂಸಿ ಆವರಣದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ರೈತರ ಸಮಸ್ಯೆಗಳ ಬಗ್ಗೆ ಆಡಳಿತ ತೋರಿಸುತ್ತಿರುವ ನಿರ್ಲಕ್ಷ್ಯ ಖಂಡನೀಯ ಎಂದರು.
