LOCAL NEWS : ಕುಕನೂರು | ಗುದ್ನೇಪ್ಪನ ಮಠದ ಜಮೀನಿನಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಹಾದಿ ಸುಗಮ : ತಕರಾರು ಅರ್ಜಿ ವಜಾ!

ಪ್ರಜಾ ವೀಕ್ಷಣೆ ದಿಜಿಟಲ್ ಸುದ್ದಿ :
ಕುಕನೂರು, ಮೇ 01 : ತಾಲೂಕಿನ ಪ್ರಸಿದ್ಧ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಗುದ್ನೇಪ್ಪನ ಮಠಕ್ಕೆ ಸೇರಿದ ಜಮೀನಿನಲ್ಲಿ ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡುವುದನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಈ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ನಡೆಯಲಿರುವ ಅಭಿವೃದ್ಧಿ ಕೆಲಸಗಳಿಗೆ ಎದುರಾಗಿದ್ದ ಕಾನೂನು ಕಂಟಕ ನಿವಾರಣೆಯಾದಂತಾಗಿದೆ.

ಪ್ರಕರಣದ ಹಿನ್ನೆಲೆ : ಕುಕನೂರಿನ ಗುದ್ನೇಪ್ಪನ ಮಠಕ್ಕೆ ಸೇರಿದ ಜಮೀನಿನ ಒಂದು ಭಾಗದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲು ಆಡಳಿತ ಮಂಡಳಿ ಹಾಗೂ ಸರ್ಕಾರ ನಿರ್ಧರಿಸಿತ್ತು. ಆದರೆ, ಈ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಜಮೀನಿನ ಮಾಲೀಕತ್ವದ ಕುರಿತು ಆಕ್ಷೇಪವೆತ್ತಿ ಗುದ್ನೇಪ್ಪನ ಮಠದ ಗ್ರಾಮಸ್ಥರು ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಇದರಿಂದಾಗಿ ಉದ್ದೇಶಿತ ಸರ್ಕಾರಿ ಕಟ್ಟಡಗಳ ಕಾಮಗಾರಿ ಶಂಕು ಸ್ತಾಪನೆ ಸ್ಥಗಿತಗೊಂಡಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಅರ್ಜಿದಾರರು ಮಂಡಿಸಿದ ವಾದದಲ್ಲಿ ಪೂರಕ ದಾಖಲೆಗಳಿಲ್ಲದಿರುವುದನ್ನು ಗಮನಿಸಿತು. ಅದು ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಈ ವ್ಯಾಜ್ಯವಾಗಿದೆ. ಈ ಮಠದ ಜಮೀನಿನಲ್ಲಿ ನಿರ್ಮಾಣವಾಗುವ ಕಟ್ಟಡಗಳು ಸಾರ್ವಜನಿಕ ಸೇವೆಗೆ ಸಂಬಂಧಿಸಿವೆ ಎಂಬ ಅಂಶವನ್ನು ಪರಿಗಣಿಸಿದೆ. ಮಠದ ಆಸ್ತಿಯ ದುರ್ಬಳಕೆಯಾಗುತ್ತಿದೆ ಎಂಬ ಅರ್ಜಿದಾರರ ಆರೋಪಕ್ಕೆ ಸರಿಯಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮಠದ ಸಮ್ಮತಿಯೊಂದಿಗೆ ನಡೆಯುತ್ತಿರುವ ಈ ಕಾಮಗಾರಿಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ:
ನ್ಯಾಯಾಲಯದ ಈ ತೀರ್ಪಿನಿಂದಾಗಿ ಕುಕನೂರಿನ ಮಠದ ಜಮೀನಿನಲ್ಲಿ ನಿರ್ಮಾಣವಾಗಬೇಕಿದ್ದ ತಾಲೂಕಾ ಆಡಳಿತ ಕಛೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗ ವೇಗ ಸಿಗಲಿದೆ. ಮಠದ ಜಮೀನು ಸಾರ್ವಜನಿಕರ ಸೇವೆಗೆ ಬಳಕೆಯಾಗುತ್ತಿರುವುದು ಸ್ವಾಗತಾರ್ಹ ಎಂದು ಸ್ಥಳೀಯ ಯಮನೂರಪ್ಪ ಕಟ್ಟೀಮನಿ ಅಭಿಪ್ರಾಯಪಟ್ಟಿದ್ದಾರೆ.