Post Views: 436
SPECIAL STORY : ಕನಕಗಿರಿ |ಉತ್ಸವಕ್ಕೆ ಒತ್ತು, ಅಭಿವೃದ್ಧಿಗೆ ನಿರ್ಲಕ್ಷ್ಯ: ಸಚಿವ ಶಿವರಾಜ ತಂಗಡಗಿ ವಿರುದ್ಧ ಟೀಕೆ..!

ಪ್ರಜಾವೀಕ್ಷಣೆ ಡಿಜಿಟಲ್ ವಿಶೇಷ ವರದಿ :
ಕನಕಗಿರಿ, ಮೇ.05 : ಕನಕಗಿರಿ ಭಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕಡೆಗಣಿಸಿ ಉತ್ಸವಗಳತ್ತ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವರಾಗಿರುವ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ಮೂರು ವರ್ಷ ಕಳೆದರೂ ಪ್ರದೇಶದ ಮೂಲಭೂತ ಅಭಿವೃದ್ಧಿ ಕಡೆ ಸಮರ್ಪಕ ಗಮನ ಹರಿಸಿಲ್ಲ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಅವರು, ಕನಕಗಿರಿ ಉತ್ಸವಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಕನಕಾಚಲಪತಿ ದೇವಸ್ಥಾನದ ಪೂರ್ವಭಾವಿ ಸಭೆಯಲ್ಲಿ ಉತ್ಸವಕ್ಕಾಗಿ ₹6 ಕೋಟಿ ಅನುದಾನ ಮಂಜೂರು ಆಗಿರುವುದಾಗಿ ತಿಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ ಇದೇ ವೇಳೆ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಅರ್ಧದಲ್ಲೇ ನಿಂತಿರುವುದು, ಸರ್ಕಾರಿ ಶಾಲೆಗಳ ಕಟ್ಟಡಗಳು ದುಸ್ಥಿತಿಯಲ್ಲಿ ಇರುವದು, ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಮುಂದುವರಿದಿವೆ ಎಂಬುದು ಸ್ಥಳೀಯರ ಅಭಿಪ್ರಾಯ.
ಇನ್ನೂ ತಾಲೂಕಿನಲ್ಲಿ ಸಮರ್ಪಕ ಕ್ರೀಡಾಂಗಣದ ಕೊರತೆ ಇದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳಿಲ್ಲದೆ, ವೈದ್ಯರ ಹಾಜರಾತಿ ಕೂಡ ನಿಯಮಿತವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ಸಮಸ್ಯೆಗಳ ನಡುವೆಯೂ ಉತ್ಸವಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವುದು ಸರಿಯಲ್ಲ. ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ : ನಿರುಪಾದಿ ಕುಂಬಾರ, ಮಲ್ಲಿಗೇವಾಡ್ -ಕನಕಗಿರಿ.