ಕೊಪ್ಪಳ, ಮೇ 16 : ನಿರುದ್ಯೋಗಿ ಯುವಜನರ ಕುರಿತು ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿರುವ ಹೇಳಿಕೆ ಅವಹೇಳನಕಾರಿ ಹಾಗೂ ಸಂವೇದನಾರಹಿತವಾಗಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗ ನೈ ಜೇಶನ್ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಖಂಡಿಸಿದ್ದಾರೆ.
ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಉದ್ಯೋಗವಿಲ್ಲದ ಯುವಕರನ್ನು ‘ಜಿರಳೆಗಳು’ ಹಾಗೂ ಪರಾವಲಂಬಿಗಳಿಗೆ ಹೋಲಿಸಿರುವುದು ಅಸಂವೇದನಶೀಲ ನಿಲುವು ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಜನರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದ್ದು, ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸಿಲ್ಲ. ನೇಮಕಾತಿ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ದೂರಿದರು.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಗಳ ವೈಫಲ್ಯವನ್ನು ಪ್ರಶ್ನಿಸದೆ, ವ್ಯವಸ್ಥೆಯ ಬಲಿಪಶುಗಳಾದ ಯುವಕರನ್ನೇ ಗುರಿಯಾಗಿಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಮುಖ್ಯ ನ್ಯಾಯಮೂರ್ತಿಗಳು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು. ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿರುವ ಜನವಿರೋಧಿ ನೀತಿಗಳ ವಿರುದ್ಧ ಯುವಜನರು ಸಂಘಟಿತ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.