BIG NEWS : ಗೃಹಲಕ್ಷ್ಮಿ ಹಣದಿಂದ 2 ಲಕ್ಷ ಮಹಿಳೆಯರು ವಂಚಿತ: ಸರ್ಕಾರದ ಲೋಪ ಒಪ್ಪಿಕೊಂಡ ಶಾಸಕ ರಾಯರೆಡ್ಡಿ..!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಯಲಬುರ್ಗಾ, ಜುಲೈ 2 : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೆಲವು ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪಗಳಿರುವುದನ್ನು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಯಲಬುರ್ಗಾದಲ್ಲಿ ಗುರುವಾರ ಮಾತನಾಡಿದ ಅವರು, “ಸರ್ಕಾರ ಅಂದಮೇಲೆ ನ್ಯೂನತೆಗಳು ಸಾಕಷ್ಟಿರುತ್ತವೆ” ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಸ್ಪಷ್ಟನೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1 ಕೋಟಿ 26 ಲಕ್ಷ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಹಣ ಪಾವತಿಸಬೇಕಾಗಿದೆ. ಆದರೆ ದಾಖಲಾತಿ ದೋಷಗಳು ಹಾಗೂ ತಾಂತ್ರಿಕ ಕಾರಣಗಳಿಂದಾಗಿ ಪ್ರಸ್ತುತ 1 ಕೋಟಿ 24 ಲಕ್ಷ ಮಹಿಳೆಯರಿಗೆ ಮಾತ್ರ ಹಣ ತಲುಪುತ್ತಿದ್ದು, ಸುಮಾರು 2 ಲಕ್ಷ ಅರ್ಹ ಫಲಾನುಭವಿಗಳಿಗೆ ಇನ್ನೂ ಹಣ ಜಮೆಯಾಗಿಲ್ಲ ಎಂದು ಅವರು ತಿಳಿಸಿದರು.
ಪ್ರತಿ ತಿಂಗಳು ಸುಮಾರು ₹2,500 ಕೋಟಿ ಹಣವನ್ನು ಭ್ರಷ್ಟಾಚಾರ ರಹಿತವಾಗಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಆದರೆ ಹಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಹಾಗೂ ಕೆಲವು ಅನರ್ಹರು ಯೋಜನೆಗಳ ಪ್ರಯೋಜನ ಪಡೆಯುತ್ತಿರುವುದು ಪರಿಷ್ಕರಣೆ ವೇಳೆ ಪತ್ತೆಯಾಗಿದೆ ಎಂದು ಹೇಳಿದರು.
