FLASH NEWS : ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ಆತಂಕ : ಮುಂಗಾರು ಬೆಳೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ..!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಮುನಿರಾಬಾದ್, ಜುಲೈ 2 : ಪ್ರಸಕ್ತ ವರ್ಷ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ತುಂಗಭದ್ರಾ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಇದರಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ಜಲಾಶಯದ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಅವರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬಂದಿಲ್ಲ. ಪ್ರಸ್ತುತ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ಸರ್ಕಾರ ಆದೇಶಿಸಿರುವುದರಿಂದ, ಕೃಷಿ ಚಟುವಟಿಕೆಗಳಿಗಾಗಿ ನೀರು ಬಿಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀರಾವರಿ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ, ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಾಖೆ ಭರವಸೆ ನೀಡಿದೆ.
