Post Views: 296
BIG NEWS : ಎಸ್ಐಆರ್ ಬಗ್ಗೆ ವಾಸ್ತವಾಂಶ ಅರಿತು ಮಾತನಾಡಿ : ರಾಯರೆಡ್ಡಿಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ ಎಚ್ಚರಿಕೆ!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ, ಜುಲೈ 4: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಶಾಸಕ ಬಸವರಾಜ ರಾಯರೆಡ್ಡಿ ಅವರು ವಾಸ್ತವಾಂಶಗಳನ್ನು ಅರಿತು ಸಾರ್ವಜನಿಕ ಹೇಳಿಕೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಈ. ಗುಳಗಣ್ಣವರ ಎಚ್ಚರಿಕೆ ನೀಡಿದರು.
ಇಂದು (ಶನಿವಾರ, ಜುಲೈ 04) ಪ್ರಕಟಣೆ ಹೊರಡಿಸಿರುವ ಅವರು, ಎಸ್ಐಆರ್ ಪ್ರಕ್ರಿಯೆಯು ಭಾರತೀಯ ಚುನಾವಣಾ ಆಯೋಗದ ನಿಯಮಾವಳಿಗಳ ಅಡಿಯಲ್ಲಿ ನಡೆಯುವ ಸ್ವಾಯತ್ತ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯನ್ನು ಕೇಂದ್ರ ಸಚಿವರು ನಿರ್ದೇಶಿಸುವ ಅಧಿಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಆಯೋಗದ ಸ್ವಾಯತ್ತ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಅಥವಾ ಕೇಂದ್ರ ಸಚಿವರೊಂದಿಗೆ ಸಂಪರ್ಕಿಸಿ ಆರೋಪ ಮಾಡುವುದು ಆಧಾರರಹಿತವಾಗಿದ್ದು, ವಾಸ್ತವಾಂಶಗಳಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಧಾರ್ಮಿಕ ಸ್ಥಳವೊಂದರ ಒಳಗೆ ಎಸ್ಐಆರ್ ಪ್ರಕ್ರಿಯೆ ನಡೆದಿರುವುದು ನಿಜವಾಗಿದ್ದರೆ, ಅದರ ಹೊಣೆ ಸ್ಥಳೀಯ ಆಡಳಿತ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ಮೇಲಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರದ ಪಿತೂರಿ ಎಂದು ಬಣ್ಣಿಸುವುದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಟೀಕಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ವಿಚಲಿತರಾಗಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ನವೀನಕುಮಾರ್ ಗುಳಗಣ್ಣವರ ಆರೋಪಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವ ನಾಯಕರು ಸೂಕ್ಷ್ಮ ವಿಷಯಗಳ ಕುರಿತು ಮಾತನಾಡುವಾಗ ವಾಸ್ತವಾಂಶಗಳಿಗೆ ಆದ್ಯತೆ ನೀಡಬೇಕು ಹಾಗೂ ಜನರಲ್ಲಿ ಗೊಂದಲ ಉಂಟುಮಾಡುವ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.