FLASH NEWS : ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧದ ಆರೋಪ: ವಜಾ ಮಾಡಿ ನ್ಯಾಯಾಂಗ ತನಿಖೆ ನಡೆಸಲು ಎಐಡಿವೈಒ ಆಗ್ರಹ.!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ, ಜುಲೈ 5: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ವಿರುದ್ಧ ಕೇಳಿಬಂದಿರುವ ಅಧಿಕಾರ ದುರುಪಯೋಗ ಹಾಗೂ ತಮ್ಮ ಪುತ್ರಿಯರ ನೇಮಕಾತಿಗೆ ಸಂಬಂಧಿಸಿದಂತೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆಗೆ ಸಹಕರಿಸಿದ ಆರೋಪಗಳ ಕುರಿತು ಎಐಡಿವೈಒ (AIDYO) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್, ಆರೋಪಗಳು ಅತ್ಯಂತ ಗಂಭೀರವಾಗಿದ್ದು, ಇದು ಕೇವಲ ವೈಯಕ್ತಿಕ ಭ್ರಷ್ಟಾಚಾರದ ಪ್ರಕರಣವಲ್ಲದೆ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸಕ್ಕೆ ಧಕ್ಕೆ ತರುವ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಆದ್ದರಿಂದ ಕೆಪಿಎಸ್ಸಿ ಅಧ್ಯಕ್ಷರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಿ, ನ್ಯಾಯಾಂಗ ತನಿಖೆ ನಡೆಸುವ ಮೂಲಕ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
