LOCAL NEWS : ರಾಜೂರ ಹಾಗೂ ಮಸಬಹಂಚಿನಾಳ ಗ್ರಾಂ ಪಂಗಳಿಗೆ ಇಒ ಬೆಟದೇಶ್ ಮಾಳೆಕೊಪ್ಪ ಭೇಟಿ : SIR ಕಾರ್ಯಕ್ಕೆ ವೇಗ ನೀಡುವಂತೆ ಸೂಚನೆ!
PV NEWS ಕನ್ನಡ 24×7 :
ಕುಕನೂರು, ಜು. 10: ಕುಕನೂರು ತಾಲೂಕಿನ ರಾಜೂರ ಹಾಗೂ ಮಸಬಹಂಚಿನಾಳ ಗ್ರಾಮ ಪಂಚಾಯಿತಿಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬೆಟದೇಶ್ ಮಾಳೆಕೊಪ್ಪ ಅವರು ಶುಕ್ರವಾರ ಭೇಟಿ ನೀಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಭೇಟಿಯ ವೇಳೆ ಬೂತ್ ಮಟ್ಟದ ಅಧಿಕಾರಿಗಳಾದ (BLO) ಮುಖಾಂತರ ಮತದಾರರಿಗೆ ಅರ್ಜಿ ನಮೂನೆಗಳ (Forms) ವಿತರಣೆ, ಭರ್ತಿ ಮಾಡಿದ ಅರ್ಜಿಗಳ ಮರುಪಡೆಯುವಿಕೆ ಹಾಗೂ ದಾಖಲೆಗಳ ಪರಿಶೀಲನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ದಿನ ಡಿಜಿಟಲೈಸೇಶನ್ ಮಾಡುವ ಮೂಲಕ ಶೇಕಡಾ 100ರಷ್ಟು ಪ್ರಗತಿ ಸಾಧಿಸುವ ಗುರಿಯೊಂದಿಗೆ ಹಂತ ಹಂತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಅರ್ಜಿಗಳು ಬಾಕಿ ಉಳಿಯದಂತೆ ಕಾರ್ಯವನ್ನು ಸಮಯೋಚಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ನಡೆಸಿ, ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಮತ್ತು ಅಗತ್ಯ ತಿದ್ದುಪಡಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಶೀಲನಾ ವೇಳೆ ತಾಲೂಕು ಯೋಜನಾಧಿಕಾರಿಗಳಾದ ಆನಂದ ಗರೂರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೈಜನಾಥ ಸಾರಂಗಮಠ ಹಾಗೂ ಸಿದ್ದನಗೌಡ ರಬ್ಬನಗೌಡ್ರ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಉಪಸ್ಥಿತರಿದ್ದರು.