PV NEWS : ವಿದ್ಯಾರ್ಥಿಗಳ ಹೋರಾಟಕ್ಕೆ ರಾಜಕೀಯ ಬಣ್ಣ ಬಳಿಯಬಾರದು: ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ್ ಗುಳಗಣ್ಣವರ!
ಕೊಪ್ಪಳ, ಜು. 27 (PV NEWS ಕನ್ನಡ 24×7): ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಕಾಂಗ್ರೆಸ್ ತನ್ನ ರಾಜಕೀಯ ಸಾಧನೆಯಾಗಿ ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವೀನಕುಮಾರ್ ಇ. ಗುಳಗಣ್ಣವರ ತಿಳಿಸಿದ್ದಾರೆ.
ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಕ್ಕಾಗಿ ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಕಾಂಗ್ರೆಸ್ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವುದು ವಿದ್ಯಾರ್ಥಿಗಳ ಹೋರಾಟಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಹೇಳಿದ್ದಾರೆ.
ದೇಶದ ಹಿತದೃಷ್ಟಿಯಿಂದ ಹಾಗೂ ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿಯುತ ನಿರ್ಧಾರವಾಗಿ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭಾವನೆಗಳಿಗೆ ಸ್ಪಂದಿಸಿದ್ದು, ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ನಿಲುವು ಹೊಂದಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ತನ್ನ ರಾಜಕೀಯ ವಿಜಯವೆಂದು ಬಿಂಬಿಸುವುದು ಸಮಂಜಸವಲ್ಲ. ವಿದ್ಯಾರ್ಥಿಗಳ ನೋವು ಮತ್ತು ಹೋರಾಟವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಕೊಪ್ಪಳ ಕಾಂಗ್ರೆಸ್ನ ನಡೆ ಖಂಡನೀಯ ಎಂದು ಗುಳಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.