PV NEWS : ನೂತನ ಸಚಿವ ರಾಯರೆಡ್ಡಿ ಅದ್ದೂರಿ ಸ್ವಾಗತ! ಬರ ಪರಿಹಾರಕ್ಕೆ ಆದ್ಯತೆ; ಸೋಮವಾರದಿಂದ ಸರ್ಕಾರದ ಕಾರ್ಯ ಚುರುಕು: ಸಚಿವ ಬಸವರಾಜ ರಾಯರೆಡ್ಡಿ!
PV NEWS ಕನ್ನಡ 24×7 :
ಕುಕನೂರು, ಆ. 6: ಸಂಪುಟ ದರ್ಜೆ ಸಚಿವರಾಗಿ ಮೊದಲ ಬಾರಿಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಕುಕನೂರು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸಿ, ಹೂಮಳೆಗೈದು ಅದ್ಧೂರಿ ಸ್ವಾಗತ ಕೋರಿದರು.
ಅಭೂತಪೂರ್ವ ಸ್ವಾಗತ ಸ್ವೀಕರಿಸಿ ಮಾತನಾಡಿದ ಸಚಿವರು, ತಮ್ಮನ್ನು ಸಚಿವರನ್ನಾಗಿ ನೇಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
“ನಿಮ್ಮೆಲ್ಲರ ಆಶೀರ್ವಾದ ಮತ್ತು ಪಕ್ಷದ ನಾಯಕತ್ವದ ವಿಶ್ವಾಸದಿಂದ ಸಚಿವನಾಗಿದ್ದೇನೆ. ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಸೋಮವಾರದಿಂದ ಸರ್ಕಾರದ ಕಾರ್ಯಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳಲಿವೆ” ಎಂದು ಹೇಳಿದರು.
ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈಗಾಗಲೇ ಸಚಿವರಿಗೆ ಜಿಲ್ಲೆ ಹಾಗೂ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವ ಜವಾಬ್ದಾರಿ ನೀಡಿದ್ದಾರೆ. ಆಗಸ್ಟ್ 5ರಿಂದ ಸಚಿವರು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಜನರ ಸಂಕಷ್ಟಗಳ ಕುರಿತು ಸ್ಥಳದಲ್ಲೇ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಆ ವರದಿಯ ಆಧಾರದ ಮೇಲೆ ಬರ ಪರಿಹಾರ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ರೈತರ ನೆರವಿಗೆ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಬರ ನಿರ್ವಹಣೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಿದ್ದು, ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.