PV NEWS : ಮಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕಿ ಡಾ. ವಾಹೀದಾ ಸುಲ್ತಾನಾ ನಿಧನ; ಶಿಷ್ಯರಲ್ಲಿ ದುಃಖದ ಛಾಯೆ!

PV NEWS KANNADA 24×7 :
ಮಂಗಳೂರು, ಆ. 6: ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಹಾಗೂ ಮಾಜಿ ವಿಭಾಗ ಮುಖ್ಯಸ್ಥೆ ಡಾ. ವಾಹೀದಾ ಸುಲ್ತಾನಾ (70) ಅವರು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು. ಸುಮಾರು ಮೂರು ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು.

ಅವರು ಪತಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡಾ. ವಾಹೀದಾ ಸುಲ್ತಾನಾ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯದ ವಾರ್ಡನ್ ಆಗಿಯೂ, ಅಲ್ಪಸಂಖ್ಯಾತ ಹಾಗೂ ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿದ್ಯಾರ್ಥಿಗಳಿಗೆ ಐಎಎಸ್–ಕೆಎಎಸ್ ತರಬೇತಿ ಕಾರ್ಯಕ್ರಮದ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾಧ್ಯಮ, ಆರೋಗ್ಯ, ತಂತ್ರಜ್ಞಾನ, ಮಹಿಳಾ ವಿಚಾರಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರು ಲೇಖನಗಳನ್ನು ರಚಿಸಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದರು.
ಬಾಂಗ್ಲಾದೇಶ, ಮಲೇಶ್ಯ, ಶ್ರೀಲಂಕಾ ಹಾಗೂ ಹಾಂಗ್ ಕಾಂಗ್ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಕಾರ್ಪೊರೇಟ್ ಕಮ್ಯುನಿಕೇಶನ್ಸ್, ಮಹಿಳೆ ಮತ್ತು ಮಾಧ್ಯಮ, ಆರೋಗ್ಯ ಸಂವಹನ ಮೊದಲಾದ ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಏಷ್ಯನ್ ಕಾಂಗ್ರೆಸ್ ಫಾರ್ ಮೀಡಿಯಾ ಆ್ಯಂಡ್ ಕಮ್ಯುನಿಕೇಶನ್ ಸಂಸ್ಥೆಯ ರಾಷ್ಟ್ರೀಯ ಸಮಿತಿಯ ಉಪನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ (MAM) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಗುರುವಿನ ಅಗಲಿಕೆಗೆ ಶಿಷ್ಯನ ಭಾವನಾತ್ಮಕ ನುಡಿ
ಡಾ. ವಾಹೀದಾ ಸುಲ್ತಾನಾ ಅವರ ಅಗಲಿಕೆ ಅವರ ಶಿಷ್ಯರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಅನೇಕ ಮಂದಿಗೆ ವೈಯಕ್ತಿಕ ನಷ್ಟವಾಗಿದೆ. ಅವರ ವಿದ್ಯಾರ್ಥಿಯಾಗಿದ್ದ ಪತ್ರಕರ್ತ ಚಂದ್ರು ಆರ್. ಭಾನಾಪುರ ಅವರು ತಮ್ಮ ನೆನಪುಗಳನ್ನು ಭಾವಪೂರ್ಣವಾಗಿ ಹಂಚಿಕೊಂಡಿದ್ದಾರೆ.

ಚಂದ್ರು ಆರ್. ಭಾನಾಪುರ್.