BIG NEWS 🚨 | ಕೊಪ್ಪಳ | ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ತುಂಗಭದ್ರಾ ನೀರು ಹಂಚಿಕೆ ನಿರ್ಧಾರಕ್ಕೆ ಆ.11ರಂದು ಐಸಿಸಿ ಸಭೆ!
PV NEWS ಕನ್ನಡ 24×7
ಕೊಪ್ಪಳ (ಮುನಿರಾಬಾದ್) ಆ.8 : 2026–27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ವಿವಿಧ ಕಾಲುವೆಗಳಿಗೆ ಒದಗಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲು ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಆ.11ರಂದು ನಡೆಯಲಿದೆ.
ಮುನಿರಾಬಾದ್ನ ಕಾಡಾ ಟಿಬಿಪಿ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ 3.30ಕ್ಕೆ ಸಭೆ ನಿಗದಿಯಾಗಿದ್ದು, ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಬಿ. ಮಲ್ಲಿಗವಾಡ ತಿಳಿಸಿದ್ದಾರೆ.
ನೀರು ಹಂಚಿಕೆ ಕುರಿತು ಮಹತ್ವದ ಚರ್ಚೆ
ಮುಂಗಾರು ಹಂಗಾಮಿನಲ್ಲಿ ತುಂಗಭದ್ರಾ ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣ ಹಾಗೂ ಅದನ್ನು ವಿವಿಧ ಕಾಲುವೆಗಳಿಗೆ ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಚ್ಚುಕಟ್ಟು ಪ್ರದೇಶದ ರೈತರ ದೃಷ್ಟಿಯಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಸಭೆಗೆ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಸದಸ್ಯರನ್ನು ಆಹ್ವಾನಿಸಲಾಗಿದೆ. ನೀರಿನ ಹಂಚಿಕೆ ಹಾಗೂ ನೀರಾವರಿ ನಿರ್ವಹಣೆಗೆ ಸಂಬಂಧಿಸಿದಂತೆ ತಮ್ಮ ಸಲಹೆ–ಸೂಚನೆಗಳನ್ನು ನೀಡುವಂತೆ ಸದಸ್ಯರಿಗೆ ಕೋರಲಾಗಿದೆ.