PV NEWS : ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯಕ್ಕೆ ಅಪಾಯ: ಯಂಕಣ್ಣ ಅರಕಲ್
ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ..!
PV NEWS ಕನ್ನಡ 24×7
ಕುಕನೂರು, ಆಗಸ್ಟ್ 11: ಮೈಕ್ರೊ ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರುತ್ತಿದ್ದು, ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗುವ ಆತಂಕವಿದೆ ಎಂದು ಮುಖ್ಯ ಶಿಕ್ಷಕ ಯಂಕಣ್ಣ ಅರಕಲ್ ಹೇಳಿದರು.
ತಾಲ್ಲೂಕಿನ ಬಳಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಮಾನಸ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಪ್ಲಾಸ್ಟಿಕ್ ಮುಕ್ತ ಗ್ರಾಮ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮನುಷ್ಯ ಅರಿವಿಲ್ಲದೆ ಪ್ರತಿನಿತ್ಯ ವಿವಿಧ ರೀತಿಯ ಹಾನಿಕಾರಕ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದಾನೆ. ಇದರಿಂದ ಪರಿಸರದ ಜೊತೆಗೆ ಮನುಷ್ಯನ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದಾಗುವ ಅಪಾಯಗಳ ಕುರಿತು ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಮಂಜುನಾಥ್ ಅಂಗಡಿ ಮಾತನಾಡಿ, ‘ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ಸಂಪೂರ್ಣವಾಗಿ ತ್ಯಜಿಸಿ, ಗ್ರಾಮದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಚಂದ್ರು ಆರ್. ಭಾನಾಪುರ್, ಲೀಲಾವತಿ ಲಂಗ್ಟಿ, ವೀಣಾ ಅರಕಲ್, ಮಂಜುಳಾ ಜೋಶಿ, ಅಕ್ಕಮಹಾದೇವಿ ಹಿರೇಮಠ್, ಬಸವ್ವ ಹಡಪದ, ಶಂಭುಲಿಂಗಪ್ಪ ಅರಿಸಿನದ್, ಭಾಗ್ಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.