BREAKING : ಆದಿವಾಸಿ–ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ : ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಆದೇಶ
PV NEWS ಕನ್ನಡ 24×7 |
ಬೆಂಗಳೂರು, ಆ.13: ರಾಜ್ಯದ ಆದಿವಾಸಿ ಹಾಗೂ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ವಿಶೇಷ ಆಯೋಗ ರಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಆದಿವಾಸಿ ಹಾಗೂ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಪ್ರತ್ಯೇಕ ವಿಶೇಷ ಆಯೋಗ ರಚಿಸಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದು ತಿಂಗಳೊಳಗೆ ಆಯೋಗ ರಚಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಕೇವಲ ಎರಡೇ ದಿನಗಳಲ್ಲಿ ಆಯೋಗ ರಚನೆಗೆ ಆದೇಶ ಹೊರಡಿಸುವ ಮೂಲಕ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ.
ರಾಜ್ಯದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಹಾಗೂ ಆರ್ಥಿಕ ಅವಕಾಶಗಳ ಕೊರತೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ, ಅವರ ಅಭಿವೃದ್ಧಿಗೆ ಅಗತ್ಯವಿರುವ ಕ್ರಮಗಳ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿಯನ್ನು ವಿಶೇಷ ಆಯೋಗ ಹೊಂದಲಿದೆ.
ಮೂಲಸೌಕರ್ಯಕ್ಕೆ ಆದ್ಯತೆ..!
ಆದಿವಾಸಿ ಹಾಗೂ ಅಲೆಮಾರಿ ಸಮುದಾಯಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಮತ್ತು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರ ಜೊತೆಗೆ ವಸತಿ, ಶುದ್ಧ ಕುಡಿಯುವ ನೀರು, ರಸ್ತೆ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಯುವಜನರಿಗೆ ಉದ್ಯೋಗಾವಕಾಶ..!
ಸಮುದಾಯದ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ಕಲ್ಪಿಸುವ ಮೂಲಕ ಆರ್ಥಿಕವಾಗಿ ಸಬಲಗೊಳಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಯುವಜನರು ಸ್ವಾವಲಂಬಿಗಳಾಗಲು ಅಗತ್ಯ ನೆರವು ನೀಡುವ ಗುರಿ ಹೊಂದಲಾಗಿದೆ.
ವಿಶೇಷ ಆಯೋಗದ ರಚನೆಯಿಂದ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ರೂಪಿಸುವ ಅವಕಾಶ ದೊರೆಯಲಿದೆ. ಸಮಾನ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಗಿದೆ.