PV NEWS : ಕುಕನೂರು | ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ KSRTC ಬಸ್: ಐವರಿಗೆ ಗಾಯ!

PV NEWS ಕನ್ನಡ 25×7 :
ಕುಕನೂರು, ಆ. 19: ಚಾಲಕನ ನಿಯಂತ್ರಣ ತಪ್ಪಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ವೊಂದು ರಸ್ತೆ ಬದಿಯ ಹಳ್ಳಕ್ಕೆ ಇಳಿದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಮಂಡಲಗಿರಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಗದಗ ನಗರದಿಂದ ಕುಕನೂರು ಪಟ್ಟಣಕ್ಕೆ ಬರುತ್ತಿದ್ದ ಬಸ್ವು ಬಟಪ್ಪನಹಳ್ಳಿ–ಮಂಡಲಗಿರಿ ಗ್ರಾಮದ ಮಧ್ಯೆ, ಮಂಡಲಗಿರಿ ಗ್ರಾಮದ ಕೆರೆಯ ಸಮೀಪದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದಿದೆ.
ಅಪಘಾತದಲ್ಲಿ ಬಸ್ನಲ್ಲಿದ್ದ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕುಕನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ನಡೆದ ಸ್ಥಳಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕುಕನೂರು ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದು ಕುಕನೂರು ಪೊಲೀಸ್ ಠಾಣೆಯ ಪಿಎಸ್ಐ ಎಸ್.ಪಿ. ನಾಯ್ಕ್ ಅವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಅವರಿಂದ ಅಪಘಾತದ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
“ಘಟನಾ ಸ್ಥಳ ಪರಿಶೀಲಿಸಿದಾಗ ಮೇಲ್ನೋಟಕ್ಕೆ ಚಾಲಕನ ನಿರ್ಲಕ್ಷ್ಯ ಕಂಡುಬಂದಿದೆ. ಮುಂದಿನ ವಿಚಾರಣೆ ಹಾಗೂ ತನಿಖೆಯಿಂದ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದೆ,”
ಮಂಜುನಾಥ, ಅಧಿಕಾರಿ -ಕುಕನೂರು ಸಾರಿಗೆ ಘಟಕ.
“ಪಟಪನಹಳ್ಳಿಯಿಂದ ಕುಕನೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿತು. ಬಸ್ನ ಸೀಟಿನಲ್ಲಿ ಕುಳಿತಿದ್ದ ನಮಗೆ ಏನಾಗುತ್ತಿದೆ ಎನ್ನುವಷ್ಟರಲ್ಲಿ ಬಸ್ ಹಳ್ಳಕ್ಕೆ ಇಳಿಯಿತು. ನನಗೂ ತಲೆಗೆ ಗಾಯವಾಗಿದೆ,”
ಗಾಯಾಳು ಪ್ರಯಾಣಿಕ ಶರಣಬಸಪ್ಪ ದಾನಕೈ ತಿಳಿಸಿದ್ದಾರೆ.

