PV NEWS : ಕುಕನೂರಿನಲ್ಲಿ ನೀರು, ಸ್ವಚ್ಛತೆ ಸಮಸ್ಯೆ : ಅಮೃತ್ 2.0 ಕಾಮಗಾರಿಗಳ ಪ್ರಗತಿ, ಸ್ವಚ್ಛತೆ ಕುರಿತು ಪಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ!
ಕುಡಿಯುವ ನೀರು, ಚರಂಡಿ ಸಮಸ್ಯೆ: ಪ.ಪಂ. ಸಭೆಯಲ್ಲಿ ಸದಸ್ಯರ ಅಸಮಾಧಾನ
PV NEWS ಕನ್ನಡ 24×7:
ಕುಕನೂರು, ಸೆ. 11: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ ಹಾಗೂ ಕಸ ವಿಲೇವಾರಿ ಸಮರ್ಪಕವಾಗಿ ನಡೆಯದಿರುವ ಬಗ್ಗೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅಮೃತ್ 2.0 ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ನಡೆಯಿತು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನ ಹಾಗೂ ಕಾಮಗಾರಿಗಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಸದಸ್ಯರು ಮಾಹಿತಿ ಪಡೆದರು. ಪೂರ್ಣಗೊಂಡ ಹಾಗೂ ಬಾಕಿ ಇರುವ ಕಾಮಗಾರಿಗಳ ವಿವರವನ್ನು ಸ್ಪಷ್ಟವಾಗಿ ನೀಡುವಂತೆ ಒತ್ತಾಯಿಸಿದರು.
ಪಟ್ಟಣದ ಹಲವು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿರುವ ಕುರಿತು ಸದಸ್ಯರು ಗಮನ ಸೆಳೆದರು. ಸಮಸ್ಯೆಯ ಸ್ಥಿತಿ ಹಾಗೂ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಯಿಂದ ಮಾಹಿತಿ ಪಡೆದು, ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಕೆಇಬಿ ಕಾಲನಿಯಲ್ಲಿ ಹಂದಿ ಹಾಗೂ ನಾಯಿಗಳ ಹಾವಳಿ ಮತ್ತು ಚರಂಡಿ ಸಮಸ್ಯೆ ತೀವ್ರವಾಗಿರುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಯಿತು. ಕಸ ವಿಲೇವಾರಿ ಹಾಗೂ ಚರಂಡಿ ಸ್ವಚ್ಛತೆ ಸಮರ್ಪಕವಾಗಿ ನಡೆಯದ ಪರಿಣಾಮ ಅಸ್ವಚ್ಛತೆ ಮತ್ತು ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ ಎಂದು ಸದಸ್ಯರು ದೂರಿದರು. ಸ್ವಚ್ಛತೆ ಕಾಪಾಡುವಂತೆ ಲೇಔಟ್ ಮಾಲೀಕರಿಗೆ ನೋಟಿಸ್ ನೀಡಿದ್ದರೂ ಕೆಲವರು ಸ್ಪಂದಿಸಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಅಧ್ಯಕ್ಷರ ಕಾರ್ಯವೈಖರಿ ಬಗ್ಗೆಯೂ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಮೂಲಸೌಕರ್ಯ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಮುಧೋಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಿರಾಜ್ ಕರಮುಡಿ, ಮುಖ್ಯಾಧಿಕಾರಿ ನಾಗೇಶ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.