PV ನ್ಯೂಸ್ ಡೆಸ್ಕ್ – ಕೊಪ್ಪಳ : ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಿದ್ರಾಮೇಶ್ವರ ಅವರು ಜುಲೈ 29ರಂದು ಅಧಿಕಾರ ವಹಿಸಿಕೊಂಡರು.
ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಾವಿತ್ರಿ ಬಿ ಕಡಿ ಅವರ ವರ್ಗಾವಣೆಯಾಗಿದ್ದು, ಇವರ ಸ್ಥಾನಕ್ಕೆ ಹಿರಿಯ ಶ್ರೇಣಿಯ ಕೆ.ಎ.ಎಸ್ ಅಧಿಕಾರಿಯಾಗಿರುವ ಸಿದ್ರಾಮೇಶ್ವರ ಅವರಿಗೆ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಿಸಿದ ಹಿನ್ನೆಲೆಯಲ್ಲಿ ಸೋಮವಾರದಂದು ಅಧಿಕಾರ ವಹಿಸಿಕೊಂಡರು.
ಸಿದ್ರಾಮೇಶ್ವರ ಅವರು 2014ರ ಕೆಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು, ಈ ಹಿಂದೆ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಬೀದರ್ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.