ರಾಯಚೂರು : ಜಿಲ್ಲೆಯಲ್ಲಿ ಶಾಲಾ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅದು ಅಲ್ಲದೇ ಸುಮಾರು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಬಳಿಯಲ್ಲಿ ಶಾಲಾ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಸಮರ್ಥ (7) ಹಾಗೂ ಶ್ರೀಕಾಂತ್(12) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಾಲಾ ಬಸ್ಸಿನಲ್ಲಿದ್ದಂತ 17ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದರೇ, ನಾಲ್ವರ ಕಾಲು ತುಂಡಾಗಿದೆ. 23 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಕಾರಿ ಬಸ್ಸಿನಲ್ಲಿದ್ದಂತ 17 ಜನರಿಗೆ ಗಾಯಗಳಾಗಿವೆ.
ಕೆಎಸ್ಆರ್ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ, ಗಾಯಗೊಂಡಿರುವಂತವರಿಗೆ 3 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಈ ಘಟನೆ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ.