LOCAL NEWS : ಶಿರ್ಘದಲ್ಲೇ ‘ಗ್ಯಾರಂಟಿ ಯೋಜನೆಗಳ ಸಮಾವೇಶ’ : ರೆಡ್ಡಿ ಶ್ರೀನಿವಾಸ ಹೇಳಿಕೆ!
ಕೊಪ್ಪಳ: ‘ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಜ .8 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ‘ಗ್ಯಾರಂಟಿ ಯೋಜನೆಗಳ ಸಮಾವೇಶದ ಪೂರ್ವಭಾವಿ ಸಭೆ’ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವರು. ಯೋಜನೆಯ ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆ ತರಬೇಕು’ ಎಂದರು.
‘ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಜನಪರವಾದ ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಮಾತನಾಡಿ ‘ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶಕ್ಕಾಗಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸುವ ಗುರಿ ಹೊಂದಲಾಗಿದ್ದು, ಫಲಾನುಭವಿಗಳನ್ನು ಕರೆ ತರಬೇಕು ಎಂದು ಹೇಳಿದರು.
ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಅರಳಿ, ಮಂಜುನಾಥ ಗೊಂಡಬಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ತಾಲ್ಲೂಕು ಸಮಿತಿಗಳ ಪ್ರಮುಖರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.